ಹಕ್ಕಿ-ಪಿಕ್ಕಿ ಸಮುದಾಯದ ಮೂಲಭೂತ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಸರ್ಕಾರ ಮಟ್ಟದಲ್ಲಿ ಕ್ರಮ - ಸಿಇಓ
ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅವರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗದ ಅವಕಾಶಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು
ಅಸ್ಮಿತೆ ವರದಿ, ಜು.14: ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಶಾಶ್ವತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಭರವಸೆ ನೀಡಿದ್ದಾರೆ.
ಖಾನಾಪೂರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತ ವ್ಯಾಪ್ತಿಯ ಇಂದಿರಾ ನಗರದಲ್ಲಿನ ಹಕ್ಕಿ-ಪಿಕ್ಕಿ ಸಮುದಾಯದವರು ವಾಸವಿರುವ ಸ್ಥಳಕ್ಕೆ ಇಂದು ಭೇಟಿ ನೀಡಿ ಅವರ ಸಮಸ್ಯೆಗಳನ್ನು ಆಲಿಸಿ ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಸಮುದಾಯದ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಕ್ರಮವಹಿಸಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳನ್ನು ಗುರುತಿಸಿ ಶೇ.೧೦೦ರಷ್ಟು ದಾಖಲಾತಿ ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಸಮುದಾಯದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ಒದಗಿಸಲು ಕ್ರಮವಹಿಸುವಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ ಅವರು, ಅಗತ್ಯವಿದ್ದಲ್ಲಿ ಆಧಾರ್ ನೋಂದಣಿ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಿ ಸೇವೆ ಒದಗಿಸುವಂತೆ ಸೂಚಿಸಿದರು. ಚಿಕ್ಕ ಮಕ್ಕಳನ್ನು ಅಂಗನವಾಡಿಗೆ ದಾಖಲಿಸಿ ಪೌಷ್ಠಿಕ ಆಹಾರ ಹಾಗೂ ಅಗತ್ಯ ಸೇವೆಗಳನ್ನು ಒದಗಿಸಲು ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಮೇತ್ರಿ, ಪಂಚಾಯತ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಜಾಧವ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಹತ್ತಿ, ತಾಪಂ ಸಹಾಯಕ ನಿರ್ದೇಶಕರಾದ ವಿಜಯ ಕೋತಿನ, ಶಶಿಧರ ಬಳ್ಳಾರಿ, ಹಲಕರ್ಣಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರೇಶ್ಮಾ ಪಾನೀವಾಲೆ ಸೇರಿ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಹಕ್ಕಿ-ಪಿಕ್ಕಿ ಸಮುದಾಯದ ಮುಖಂಡರು ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.
****
ಈ ಲೇಖನ ಹಂಚಿಕೊಳ್ಳಿ