ಬೆಳಗಾವಿ ಜಿಲ್ಲೆಯಲ್ಲಿ ಶೇ.95 ರಷ್ಟು ಬಿತ್ತನೆ : ಜಿಪಂ ಸಿಇಒ ರಾಹುಲ್ ಶಿಂಧೆ
ಅಸ್ಮಿತೆ ವರದಿ, ಅ.04: ಬೆಳಗಾವಿ ಜಿಲ್ಲೆಯ ಮುಂಗಾರು ಹಂಗಾಮಿನ 7.52 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ಕೃಷಿ ಬೆಳೆಗಳ ಬಿತ್ತನೆ ಗುರಿಗೆ 7.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದ್ದು, ಈವರೆಗೆ ಶೇ.95 ರಷ್ಟು ಕ್ಷೇತ್ರದಲ್ಲಿ ಬಿತ್ತನೆಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ತಿಳಿಸಿದ್ದಾರೆ.
ಬೆಳಗಾವಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ 2026-27ನೇ ಸಾಲಿನ ಅನುಷ್ಟಾನ ಇಲಾಖೆಗಳ ವಿವಿಧ ಯೋಜನೆಗಳ ಜಿಲ್ಲಾಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು ಹಂಗಾಮಿಗೆ 37543 ಕ್ವಿಟಾಲ್ ವಿವಿಧ ಬಿತ್ತನೆ ಬೀಜಗಳ ಬೇಡಿಕೆ ಇದ್ದು 37267 ಕ್ವಿ. ದಾಸ್ತಾನು ಮಾಡಿ ಈವರೆಗೆ 31669 ಕ್ವಿ. ವಿತರಣೆ ಮಾಡಲಾಗಿದೆ. ಪ್ರಸ್ತುತ 5598 ಕ್ವಿ. ವಿವಿಧ ಬಿತ್ತನೆ ಬೀಜಗಳ ದಾಸ್ತಾನು ಲಭ್ಯವಿದ್ದು ಬಿತ್ತನೆ ಬೀಜದ ಯಾವುದೇ ಕೊರತೆ ಇರುವುದಿಲ್ಲ. ರೈತರಿಗೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಕೃಷಿ ಇಲಾಖೆಯ ವಿವಿಧ ಯೋಜನೆಗಳಾದ ಆತ್ಮಾ, ಕೃಷಿ ಭಾಗ್ಯ, ಹೈಟೆಕ್ ಹಾರ್ವೆಸ್ಟರ್ ಹಬ್, ಕೃಷಿ ಯಾಂತ್ರೀಕರಣ, ರಾಷ್ಟ್ರೀಯ ನೈಸರ್ಗಿಕ ಅಭಿಯಾನ, ಕರ್ನಾಟಕ ರೈತ ಸಮೃದ್ದಿ ಯೋಜನೆ, ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ, ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ- ಎಣ್ಣೆ ಕಾಳು, ಬೆಳೆ ವೈವಿದ್ಯತೆ, ದ್ವಿದಳ ಧಾನ್ಯಗಳಲ್ಲಿ ಆತ್ಮ ನಿರ್ಭರತೆ, ವಿಬಿ-ಜಿ ರಾಮ ಜಿ ಯೋಜನೆಗಳ ಸಮರ್ಪಕ ಅನುಷ್ಟಾನ ಕೈಗೊಳ್ಳುವಂತೆ ಜಿಪಂ ಸಿಇಒ ರಾಹುಲ್ ಶಿಂಧೆ ಅವರು ನಿರ್ದೇಶನ ನೀಡಿದರು.
**
ಈ ಲೇಖನ ಹಂಚಿಕೊಳ್ಳಿ