ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ.
ಸಿಲಿಂಡರ್ ಬೆಲೆ ಏರಿಕೆ:ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ
ಬೆಳಗಾವಿ: ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ಮತ್ತೆ 29 ರೂ. ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ 60 ರೂ. ಹೆಚ್ಚಿಸಲಾಗಿತ್ತು. ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರುತ್ತಿದ್ದರೆ, ಮತ್ತೊಂದು ಕಡೆ ಅಡುಗೆ ಅನಿಲದ ಬೆಲೆ ಹೆಚ್ಚಿಸುವ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಮಧ್ಯಮ ವರ್ಗ, ಬಡವರು ಮತ್ತು ಗೃಹಿಣಿಯರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
ಕೇಂದ್ರ ಸರ್ಕಾರ ತಕ್ಷಣವೇ ಈ ಬೆಲೆ ಏರಿಕೆ ನಿರ್ಧಾರವನ್ನು ಹಿಂಪಡೆದು, ಸಾಮಾನ್ಯ ಕುಟುಂಬಗಳಿಗೆ ಪರಿಹಾರ ಒದಗಿಸಬೇಕು. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ ಬದುಕನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳುವ ಬದಲು, ಅವರ ಹಿತಾಸಕ್ತಿಯನ್ನು ಕಾಪಾಡುವ ನೀತಿಗಳನ್ನು ಜಾರಿಗೆ ತರಬೇಕು ಎಂದು ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದ್ದಾರೆ.
ಈ ಲೇಖನ ಹಂಚಿಕೊಳ್ಳಿ